
ಕಲುಷಿತ ನೀರು, ಮಾಧ್ಯಮ ವರದಿ : ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ
ಬೆಂ.ಗ್ರಾ ಜಿಲ್ಲೆ ದೇವನಹಳ್ಳಿ ತಾಲೂಕು :
ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಚಿಕ್ಕಬಳ್ಳಾಪುರ ರಸ್ತೆಯಲ್ಲಿರುವ ಓವರ್ ಹೆಡ್ ಟ್ಯಾಂಕ್ ಮೂಲಕ ಕಲುಷಿತ ನೀರು ಸರಬರಾಜು ಆಗಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಲೋಕೋಪಯೋಗಿ ಇಲಾಖೆಯ ವತಿಯಿಂದ ಚಿಕ್ಕಬಳ್ಳಾಪುರ ರಸ್ತೆಯ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ಮಾಡುವ ಸಂದರ್ಭದಲ್ಲಿ ನೀರು ಸರಬರಾಜು ಪೈಪ್ ಗೆ ಹಾನಿಯಾಗಿರುವುದರಿಂದ ಮಣ್ಣು ಮಿಶ್ರಿತ ನೀರು ಸಂಗ್ರಹವಾಗಿರುವುದು ಪರಿಶೀಲನೆ ಸಂದರ್ಭದಲ್ಲಿ ಕಂಡು ಬಂದಿದೆ.
ಆದ್ದರಿಂದ ಕೂಡಲೇ ಮಣ್ಣು ಮಿಶ್ರಿತ ನೀರು ಹೊರ ತೆಗೆದು ಟ್ಯಾಂಕ್ ಸ್ವಚ್ಛಗೊಳಿಸಿ ಶುದ್ಧ ನೀರು ಸರಬರಾಜು ಮಾಡಲು ಪುರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ಥಳದಲ್ಲೇ ಸೂಚಿಸಿದರು.
ನಂತರ ವಿಜಯಪುರ ಪಟ್ಟಣದಲ್ಲಿ ನೀರು ಸರಬರಾಜು ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಕುಡಿಯುವ ನೀರು ಸಮಸ್ಯೆ ಆಗದಂತೆ ಸಮರ್ಪಕ ಹಾಗೂ ಶುದ್ಧ ನೀರು ಸರಬರಾಜು ಮಾಡಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂಧರ್ಭದಲ್ಲಿ ವಿಜಯಪುರ ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ, ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್, ಪುರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.


